ವಾಲ್ಮೀಕಿ ನಿಗಮ ಹಗರಣ; ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಚಾಟಿ.

ಬೆಂಗಳೂರು: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ಇಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿಟ್ಟಿದ್ದ ನಿಧಿಯನ್ನು, ತಮ್ಮ 5 ಗ್ಯಾರಂಟಿಗಳನ್ನು ನೆರವೇರಿಸಲು ರಾಜ್ಯ ಸರ್ಕಾರ ಬಳಸಿಕೊಂಡಿರುವ ಕುರಿತು, ಏಳು ದಿನದೊಳಗೆ ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡಿದೆ.
ರಾಜ್ಯ ಸರ್ಕಾರದ ಶಾಸಕರಾದ ಬಿ.ನಾಗೇಂದ್ರ ಅವರು ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ವಾಲ್ಮೀಕಿ ಸಮಾಜದ ಅಭಿವೃದ್ಧಿಗಾಗಿ ಮೀಸಲಿಟ್ಟ ನಿಧಿಯಿಂದ, ಇವರು ಸರಿಸುಮಾರು ₹200 ಕೋಟಿ ಹಣವನ್ನು ಲಪಟಾಯಿಸಿರುವ ಆರೋಪವಿದೆ. ಅವ್ಯವಹಾರದ ಹಿನ್ನೆಲೆಯಲ್ಲಿ ನಾಗೇಂದ್ರ ಇತ್ತೀಚಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಕೂಡ ನೀಡಿದ್ದರು. ಈ ಹಗರಣದ ಕುರಿತು ಕುರಿತು ಜಾರಿ ನಿರ್ದೇಶನಾಲಯ ತನಿಖೆಯನ್ನು ನಡೆಸುತ್ತಿದೆ.
ತಮ್ಮ 5 ಗ್ಯಾರಂಟಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಿಟ್ಟ ₹14,730.53 ಕೋಟಿ ಹಣವನ್ನು ಬಳಸಿಕೊಂಡ ಬಗ್ಗೆ, ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ತಮ್ಮ ಪತ್ರದಲ್ಲಿ ಉಲ್ಲೇಖಿಸಿದೆ. ಈ ಪತ್ರಿಕೆ ಉತ್ತರವಾಗಿ ವರದಿಯನ್ನು ರಾಜ್ಯ ಸರ್ಕಾರ ನೀಡಲು ಕೇವಲ ಏಳು ದಿನಗಳಷ್ಟೇ ಬಾಕಿ ಇದೆ.